Monday, 14 November 2016

ಶ್ರೀ ಕನಕ ದಾಸರು

ಶ್ರೀ ಕನಕ ದಾಸರು

ಶ್ರೀ ಕನಕದಾಸರು[ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.


ಜೀವನ

ಜನನ

ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ 1487ರಲ್ಲಿ ಕುರುಬ ಗೌಡ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು.

ಸಾಧನೆ

ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ. ===ಕನಕನ ಕಿಂಡಿ

ಅನೇಕರ ನಂಬಿಕೆಯಂತೆ ಉಡುಪಿಯ ದೇವಸ್ಥಾನದಲ್ಲಿ ಅವರಿಗೆ ಪ್ರವೇಶ ದೊರೆಯದೆ ಹೋದಾಗ ದೇವಸ್ಥಾನದ ಹಿಂದೆ ನಿಂತು ಹಾಡತೊಡಗಿದರಂತೆ ("ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ"). ಆಗ ಹಿಂಭಾಗದ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತಂತೆ. (ಈಗಲೂ ಉಡುಪಿ ಕೃಷ್ಣನ ದೇವಸ್ಥಾನದ ಹಿಂದುಗಡೆಯ ಗೋಡೆಯಲ್ಲಿರುವ ಬಿರುಕಿನಲ್ಲಿ ಶ್ರೀಕೃಷ್ಣನ ಕಾಣಬಹುದು. ಇಲ್ಲಿ ಒಂದು ಕಿಟಕಿಯನ್ನು ನಿರ್ಮಿಸಿ ಅದನ್ನು 'ಕನಕನ ಕಿಂಡಿ' ಎಂದು ಕರೆಯಲಾಗಿದೆ).

ಉಡುಪಿಯ ಕನಕನ ಕಿಂಡಿಯ ಬಗ್ಗೆ ಸ್ವತಃ ಕನಕದಾಸರ ಕೃತಿಗಳಲ್ಲಾಗಲೀ ಇತರೆ ಕೃತಿಗಳಲ್ಲಾಗಲೀ ಮಠದ ದಾಖಲೆಗಳಲ್ಲಾಗಲೀ ಚರಿತ್ರೆಯ ಪುಟಗಳಲ್ಲಾಗಲೀ ಶಾಸನಗಳಲ್ಲಾಗಲೀ ಎಲ್ಲಿಯೂ ಪ್ರಸ್ತಾಪವಾಗಿಲ್ಲ.ಇನ್ನು ಉಡುಪಿಯ ಆ ದೇವಾಲಯವಾದರೋ ಆಗಮಾದಿಗಳಲ್ಲಿ ಹೇಳಿರುವ ವಾಸ್ತುವಿನ್ಯಾಸದನ್ವಯ ಕಟ್ಟಿಯೂ ಇಲ್ಲ. ಅಲ್ಲಿ ಬಲಿಕಲ್ಲು, ಧ್ವಜಸ್ತಂಭ, ಅಂತರಾಳ, ಅರ್ಧಮಂಟಪ, ಪ್ರದಕ್ಷಿಣಾಪಥಗಳೂ ಇಲ್ಲ. ಇನ್ನು ಪ್ರಾಣದೇವರ ಪ್ರತಿಷ್ಠಾಪನೆಯೂ ವಿಭಿನ್ನವೇ.ಉಡುಪಿಯ ಶ್ರೀಕೃಷ್ಣ ವಿಗ್ರಹವನ್ನು ಮಧ್ವಾಚಾರ್ಯರು ಕ್ರಿಸ್ತ ಶಕ ೧೨೩೮ (ಶಕವರ್ಷ ೧೧೬೦ ಹೇವಿಳಂಬಿ ಸಂವತ್ಸರ ಮಾಘ ಶುದ್ಧ ತದಿಗೆ) ನೇ ವರ್ಷದಲ್ಲಿ ಪಶ್ಚಿಮಾಭಿಮುಖಿಯಾಗಿ ಪ್ರತಿಷ್ಠೆ ಮಾಡಿದ್ದರಾಗಲೀ ಪೂರ್ವಾಭಿಮುಖವಾಗಿ ಅಲ್ಲ. ತಮಗೆ ಪಶ್ಚಿಮ ಸಮುದ್ರದಿಂದ ಲಭ್ಯವಾದ ಆ ಮೂರ್ತಿಯನ್ನು ಪಶ್ಚಿಮಕ್ಕೇ ಮುಖ ಮಾಡಿ ಪ್ರತಿಷ್ಠಾಪಿಸಿ ಪಶ್ಚಿಮ ಸಮುದ್ರಾಧೀಶ್ವರನನ್ನಾಗಿ ಕರೆದರೆನ್ನುವುದೇ ಸತ್ಯಸ್ಯ ಸತ್ಯ. ಇದಕ್ಕೆ ದಾಖಲೆಯಾಗಿ ಕನಕದಾಸರ ಸಮಕಾಲೀನರಾದ ಸುರೋತ್ತಮ ತೀರ್ಥರ ಹೇಳಿಕೆ.ಅದರ ತಾತ್ಪರ್ಯ ಹೀಗಿದೆ: 'ದೇವತಾ ವಿಗ್ರಹಗಳನ್ನು ಪೂರ್ವಾಭಿಮುಖಿಯಾಗಿಯೇ ಸ್ಥಾಪಿಸಬೇಕೆಂಬ ನಿಯಮ ಏನೂ ಇಲ್ಲ. ಆದ್ದರಿಂದಲೇ ಮಧ್ವರು ಈ ಕೃಷ್ಣನ ಪ್ರತಿಮೆಯನ್ನು ಪಶ್ಚಿಮಾಭಿಮುಖಿಯಾಗಿ ಸ್ಥಾಪಿಸಿದ್ದಾರೆ". ಮಧ್ವರು ಶ್ರೀಕೃಷ್ಣಪಾದಾಂಬುಜಾರ್ಚಕರಾಗಿ ತಮ್ಮ ಮತ್ತು ತಮ್ಮ ಎಂಟು ಮಂದಿ ಶಿಷ್ಯರು ಮತ್ತು ಅವರ ಪರಂಪರೆಯವರ ನಿತ್ಯಾರ್ಚನೆಗಾಗಿ ಸ್ಥಾಪಿಸಿದ ಮೂರ್ತಿ ಇದು. ಈ ಮೂರ್ತಿ ಮತ್ತು ಅದರ ಅರ್ಚನೆ ಮಠದ ಖಾಸಗಿ ಕ್ರಿಯೆಗಳಾಗಿದ್ದು ಸಾರ್ವಜನಿಕರಿಗೆ ತೆರೆದಿಟ್ಟದ್ದಲ್ಲ.ವಾದಿರಾಜರು, ಪುರಂದರದಾಸರು, ಕನಕದಾಸರು ತ್ರಿವೇಣೀ ಸಂಗಮದಂತೆ. ಅವರು ಮೂರು ಮಂದಿಯೂ ಒಂದೇ ಓರಗೆಯವರು, ಒಂದೇ ಮನಸ್ಸಿನವರು, ಸಮಕಾಲೀನರು, ಪರಸ್ಪರ ಗೌರವಾದರಗಳನ್ನು ಹೊಂದಿದ್ದವರು. ಪ್ರತಿಯೊಬ್ಬರಿಗೂ ಇನ್ನಿಬ್ಬರ ಪ್ರೌಢಿಮೆ ಔನ್ನತ್ಯಗಳ ಅರಿವಿ ತ್ತು. ೧೨೦ ವರ್ಷಗಳ ಕಾಲ ಬದುಕಿದ್ದ ವಾದಿರಾಜ(೧೪೮೦-೧೬೦೦)ರಿಗೆ ತಮ್ಮ ಮಠದಲ್ಲಿ ಸರ್ವಾಂಗೀಣ ಸುಧಾರಣೆ ತರುವ ತವಕ ಇತ್ತಾದರೂ ಅಲ್ಲಿ ಭದ್ರವಾಗಿ ಬೇರೂರಿದ್ದ ಮಡಿವಂತಿಕೆಯನ್ನು ಹೋಗಲಾಡಿಸಲು ಅವರಿಂದಾಗಿರಲಿಲ್ಲ. ವಾದಿರಾಜರೊಂದಿಗೆ ತಮಗಿದ್ದ ಸ್ನೇಹವನ್ನು ದುರುಪಯೋಗ ಪಡಿಸಿಕೊಂಡು ಮಠದಲ್ಲಿ ಪ್ರವೇಶ ಪಡೆಯುವ ಧಾರ್ಷ್ಟ್ಯವೂ ಕನಕರಿಗಿರಲಿಲ್ಲ.ಹೀಗೆ ಕನಕದಾಸರ ಸಾಹಿತ್ಯಕೃತಿಗಳು, ಅವರ ಬಗೆಗಿನ ಐತಿಹ್ಯಗಳು, ಅವರ ಕುರಿತು ಇತರೇ ಸಾಹಿತ್ಯಗಳಲ್ಲಿ ಅಥವಾ ಶಾಸನಗಳಲ್ಲಿನ ಮಾಹಿತಿಗಳನ್ನು ಕ್ರೋಢೀಕರಿಸಿ ಕನಕದಾಸರ ಸ್ಥೂಲ ಜೀವನ ಚಿತ್ರಣವನ್ನು ರಚಿಸಬಹುದಲ್ಲದೆ ಪರಿಪೂರ್ಣ ಜೀವನಚರಿತ್ರೆಯ ನಿರೂಪಣೆ ಸಾಧ್ಯವಿಲ್ಲದ ಮಾತು. ಆದರೆ ವಿದ್ವತ್ ನೆಲೆಯಲ್ಲಿ ವಿದ್ವತ್ಸಂಪನ್ನ ಕನಕದಾಸರು ಕುಲಾತೀತರಾಗಿ ಕಾಲಾತೀತರಾಗಿ ಕನ್ನಡ ಸಾರಸ್ವತ ಲೋಕದಲ್ಲಿ ಅದ್ವೀತಿಯ ಸ್ಥಾನಗಳಿಸಿ, ಚಿರಸ್ಮರಣೀಯರಾಗಿದ್ದಾರೆ.



ಸಾಹಿತ್ಯ ರಚನೆ

ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಂತಿವೆ:

ಮೋಹನತರಂಗಿಣಿನಳಚರಿತ್ರೆರಾಮಧಾನ್ಯ ಚರಿತೆಹರಿಭಕ್ತಿಸಾರನೃಸಿಂಹಸ್ತವ (ಉಪಲಬ್ದವಿಲ್ಲ)

ಮೋಹನತರಂಗಿಣಿ

ಮೋಹನತರಂಗಿಣಿಯು 42 ಸಂಧಿಗಳಿಂದ ಕೂಡಿದ್ದು ಸಾಂಗತ್ಯದಲ್ಲಿ ರಚಿತವಾಗಿರುವ 2700 ಪದ್ಯಗಳಿವೆ. ಮೋಹನತರಂಗಿಣಿಯಲ್ಲಿ ಕನಕದಾಸರು ಕೃಷ್ಣಚರಿತ್ರೆಯನ್ನು ಹೇಳುತ್ತಾ ತಮ್ಮ ಅಧಿರಾಜ ಕೃಷ್ಣದೇವರಾಯನನ್ನೇ ಕೃಷ್ಣನಿಗೆ ಹೋಲಿಸುತ್ತಾರೆ. ಅವರ ದ್ವಾರಕಾಪುರಿ ಸ್ವಯಂ ವಿಜಯನಗರವೇ ಆಗಿರುವುದು ಇತಿಹಾಸದಿಂದ ತಿಳಿದು ಬರುತ್ತದೆ. ಮೋಹನತರಂಗಿಣಿ ಅಥವಾ ಕೃಷ್ಣಚರಿತೆ ಎಂಬ ಈ ಕಾವ್ಯದಲ್ಲಿ ಕನಕದಾಸರ ಸಮಕಾಲೀನ ಜೀವನ ಚಿತ್ರಗಳು ಹಾಗೂ ಪೌರಾಣಿಕ ಕಥೆಗಳು ಅಚ್ಚಗನ್ನಡದಲ್ಲಿ ನಿರೂಪಿತವಾಗಿವೆ. ದಣ್ಣಾಯಕನಾಗಿ ಕನಕ ಆಗಾಗ್ಗೆ ರಾಜಧಾನಿ ವಿಜಯನಗರಕ್ಕೆ ಹೋಗಬೇಕಾಗಿತ್ತು. ವಿಜಯನಗರ ಸಾಮ್ರಾಜ್ಯದ ರಾಜವೈಭವ, ರಾಜಸಭೆ, ರಾಜಪರಿವಾರದ ಸರಸ ಸುಮ್ಮಾನ, ಶೃಂಗಾರ ಜೀವನ, ಜಲಕ್ರೀಡೆ, ಓಕುಳಿಯಾಟ, ನವರಾತ್ರಿ, ವಿಜಯನಗರದ ಪುರರಚನೆ, ಉದ್ಯಾನವನ, ಪ್ರಜೆಗಳ ವೇಷಭೂಷಣ, ರಾಜ್ಯದ ಯುದ್ಧ ವಿಧಾನ ಇತ್ಯಾದಿಗಳು ಅವನ ಮನಸೂರೆಗೊಂಡಿದ್ದವು. ಕವಿ ಮನಸಿನ ಕನಕ ತನ್ನ ಅನುಭವವನ್ನೆಲ್ಲ ಬರಹ ರೂಪಕ್ಕೆ ತಂದ. ಆ ಬರಹವೇ ಇಂದು ನಮಗೆ ಲಭ್ಯವಿರುವ ಮೋಹನತರಂಗಿಣಿ. ಕನಕನ ಯೌವನ ಕಾಲದಲ್ಲಿ ರಚಿತವಾದ ತರಂಗಿಣಿಯ ಒಡಲಲ್ಲಿ ಯುದ್ಧದ ವರ್ಣನೆಗಳು ಹೆಚ್ಚೆನ್ನಬಹುದು. ಏಕೆಂದರೆ ಕನಕ ಸ್ವತಃ ಕಲಿಯಾಗಿದ್ದವನೇ ತಾನೇ? ಶಂಬರಾಸುರ ವಧೆ, ಬಾಣಾಸುರ ವಧೆ, ಹರಿಹರ ಯುದ್ಧ ಹೀಗೆ ವೀರರಸ, ರೌದ್ರರಸ ಕಾವ್ಯದಲ್ಲಿ ಮೇಳೈಸಿವೆ.

ಸೋಮಸೂರಿಯ ವೀಥಿಯ ಇಕ್ಕೆಗಳಲಿಹೇಮ ನಿರ್ಮಿತ ಸೌಧದೋಳಿರಮಣೀಯತೆವೆತ್ತ ಕಳಸದಂಗಡಿಯಿರ್ದುಂವಾ ಮಹಾ ದ್ವಾರಕಾಪುರದೇಓರಂತೆ ಮರಕಾಲರು ಹಡಗಿನ ವ್ಯವಹಾರದಿ ಗಳಿಸಿದ ಹಣವಭಾರ ಸಂಖ್ಯೆಯಲಿ ತೂಗುವರು ಬೇಡಿದರೆ ಕುಬೇರಂಗೆ ಕಡವ ಕೊಡುವರು
ಕೀರ್ತನೆಗಳು

ಕನಕದಾಸರು 316 ಕೀರ್ತನೆಗಳನ್ನು ರಚಿಸಿದ್ದಾರೆ. ಕನಕದಾಸರ ಭಕ್ತಿ ಪಾರಮ್ಯವನ್ನು ಅವರ ಕೀರ್ತನೆಗಳಲ್ಲಿ ಕಾಣಬಹುದು. ಶ್ರೀಹರಿಯನ್ನು ತಮ್ಮ ಧಣಿಯಾಗಿ, ಇನಿಯನಾಗಿ, ಅಣೋರಣೀಯನಾಗಿ, ಮಹತೋಮಹೀಮನಾಗಿ ಅವರು ಕಂಡಿದ್ದಾರೆ. 'ಬಾ ರಂಗ ಎನ್ನ ಮನಕೆ ಎಂದು ಹೃದಯ ಸದನಕ್ಕೆ 'ಎಂದು ಕರೆದು ನೆಲೆ ನಿಲ್ಲಿಸಿಕೊಂಡ ಅನುಭಾವ ಅವರದು. ಒಳಗಣ್ಣಿನಿಂದ ಅವನ ಕಂಡು- 'ಕಂಡೆ ನಾ ತಂಡ ತಂಡ ಹಿಂಡು ದೈವ ಪ್ರಚಂಡ ರಿಪು ಗಂಡ ಉದ್ಧಂಡ ನರಸಿಂಹನ' ಎಂದು ಸಂತೋಷಪಟ್ಟಿದ್ದಾರೆ. 'ಎಲ್ಲಿ ನೋಡಿದರಲ್ಲಿ ರಾಮ' ಎಂಬ ಅನುಭೂತಿಯಲ್ಲಿ ಹರಿಯನ್ನು ಕಂಡ ಬಳಿಕ 'ಬದುಕಿದೆನು ಬದುಕಿದೆನು ಭವ ಎನಗೆ ಹಿಂಗಿತು' ಎಂಬ ಧನ್ಯತಾಭಾವ. 'ದಾಸದಾಸರ ಮನೆಯ ದಾಸಿಯರ ಮಗ ಮಂಕುದಾಸ ಮರುಳುದಾಸ ನರಜನ್ಮಹುಳು ಪರಮಪಾಪಿ' ಎಂದು ಕರೆದುಕೊಂಡಿದ್ದ ಅವರು ಜೀವ ಮಾಗಿ ಹಣ್ಣಾದಂತೆ ಪರಮಾತ್ಮನ ಸಾಕ್ಷಾತ್ಕಾರವಾದಂತೆ 'ಆತನೊಲಿದ ಮೇಲೆ ಇನ್ಯಾತರ ಕುಲವಯ್ಯಾ' ಎಂದುಕೊಳ್ಳುತ್ತಾರೆ.

ಜೈನ, ವೀರಶೈವರ ಕಿತ್ತಾಟ, ಮುಸಲ್ಮಾನ ಪ್ರಾಬಲ್ಯ ಇವುಗಳಿಂದ ಸೊರಗಿ ಹೋಗಿದ್ದ ವೈದಿಕ ಧರ್ಮಕ್ಕೆ ಪುನಶ್ಚೇತನ ನೀಡಲು ವ್ಯಾಸರಾಯರಂಥವರು ಶ್ರಮಿಸುತ್ತಿದ್ದ ಕಾಲವದು. ವೈದಿಕ ಸಂಸ್ಕೃತಿಯ ಉತ್ಥಾನಕ್ಕೆಂದು ಹುಟ್ಟು ಹಾಕಲಾದ ವಿಜಯನಗರ ಸಾಮ್ರಾಜ್ಯ ಕೃಷ್ಣದೇವರಾಯನ ಅಳಿವಿನ ನಂತರ ಪತನದ ಹಾದಿ ಹಿಡಿದಿತ್ತು. ಇಂಥಲ್ಲಿ ಕನಕದಾಸರಂಥವರ ಕಾವ್ಯಕೃಷಿ ಹಾಗೂ ಸಾರ್ವಜನಿಕ ಜೀವನ ವ್ಯಾಸರಾಯರಿಗೆ ಬೆಂಬಲದ ಶ್ರೀರಕ್ಷೆಯಾಗಿದ್ದವು.

'ನಾವು ಕುರುಬರು ನಮ್ಮ ದೇವರು ಬೀರಯ್ಯ ಕಾವ ನಮ್ಮಜ್ಜ ನರಕುರಿ ಹಿಂಡುಗಳ' ಎಂದು ವಿನೀತ ಜಾತಿ ಭಾವನೆ ತೋರಿದ್ದ ಕನಕದಾಸರು ವ್ಯಾಸರಾಯರ ಸಂಪರ್ಕದ ನಂತರ 'ಕುಲಕುಲಕುಲವೆಂದು ಹೊಡೆದಾಡದಿರಿ' ಎಂದು ಜಂಕಿಸಿ ಕೇಳುವ ಹಾಗಾದರು.

ಇಂಥ ನಡವಳಿಕೆಗಳಿಂದ ವೈದಿಕ ಧರ್ಮದ ಗುತ್ತಿಗೆ ತಮ್ಮದು ಎಂದು ಭಾವಿಸಿದ್ದ ಬ್ರಾಹ್ಮಣರಿಗೆ ಕನಕದಾಸರು ಬಿಸಿ ತುಪ್ಪವಾದರು. ಹಿಂದೂ ಸಮಾಜದಲ್ಲಿ ಈ ಬ್ರಾಹ್ಮಣಬ್ರಾಹ್ಮಣೇತರ ಕಂದರ/ಕ ದೊಡ್ಡದಾಗುತ್ತಾ ಹೋದಂತೆ ವ್ಯಾಸಪೀಠದ ಜೊತೆಗೆ ದಾಸಕೂಟದ ರಚನೆಯೂ ಆಗಬೇಕಾದಂತಹ ಅನಿವಾರ್ಯತೆ ಮೂಡಿತು. ಉಚ್ಚಕುಲದ ಮಾಧ್ವ ಬ್ರಾಹ್ಮಣರು ಶಾಸ್ತ್ರಾಧ್ಯಯನ-ತರ್ಕ-ವ್ಯಾಕರಣಾದಿ ವಿಶಿಷ್ಟ ಜ್ಞಾನಸಂಪನ್ನರಾಗಿ ಶಬ್ದ ಶಬ್ದಗಳನ್ನು ತಿಕ್ಕಿ ತೀಡಿ ನಿಷ್ಪತ್ತಿ ಹಿಡಿದು ಸಿದ್ಧಾಂತ ಪ್ರಮೇಯಗಳನ್ನು ಮಂಡಿಸುವುದೇ ಮುಂತಾದ ಪ್ರಕ್ರಿಯೆಗಳನ್ನು ವ್ಯಾಸಪೀಠದಲ್ಲಿ ನಡೆಯಿಸುತ್ತಿದ್ದರು. ಪುರಂದರದಾಸ, ಕನಕದಾಸ, ಜಗನ್ನಾಥದಾಸ ಮೊದಲಾದವರ ಪ್ರಾತಿನಿಧಿಕ ಸಂಘಟನೆಯೇ ದಾಸಕೂಟ. ಇವರೂ ಮಾಧ್ವ ಮತ ಪ್ರಮೇಯಗಳನ್ನೇ ಪಸರಿಸುತ್ತಾ ಆಚರಿಸುತ್ತಿದ್ದರಾದರೂ ಅವುಗಳನ್ನು ಅರಿಯಲು ಸಂಸ್ಕೃತ ಜ್ಞಾನದ ಅನಿವಾರ್ಯತೆಯನ್ನು ನಿರಾಕರಿಸಿ, ಜಾತಿ ಮತಗಳ ಕಟ್ಟು ಪಾಡಿಲ್ಲದ ಇವರು ಶಾಸ್ತ್ರಾಧ್ಯಯನದ ಅನಿವಾರ್ಯತೆ ಇಲ್ಲದೆ ತಮ್ಮ ಅನುಭಾವದಿಂದ ಹೊರಹೊಮ್ಮುವ ಭಕ್ತಿಭಾವನೆಗಳನ್ನು ತಮ್ಮ ತಾಯ್ನುಡಿಯಲ್ಲಿ ಹಾಡಿ ಲೋಕಪಾವನವನ್ನೂ ಆತ್ಮೋದ್ಧಾರವನ್ನೂ ಮಾಡ ಬೇಕೆನ್ನುವವರು. ಇಂಥಾ ದಾಸಕೂಟವನ್ನು ಹುಟ್ಟುಹಾಕಿ ಪೋಷಿಸಿ ಬೆಳೆಸಿದವರು ವ್ಯಾಸರಾಯರು ಹಾಗೂ ವಾದಿರಾಜರು. ಇಷ್ಟಿದ್ದರೂ ದಾಸಕೂಟ ವ್ಯಾಸಪೀಠಗಳ ನಡುವೆ ಆಗಿಂದಾಗ್ಗೆ ಘರ್ಷಣೆಗಳು ನಡೆದೇ ಇದ್ದವು. ಈ ಕುರಿತು ಕನಕ ಪುರಂದರರ ಕೀರ್ತನೆಗಳೇ ನಮಗೆ ಸೂಚ್ಯವಾಗಿ ಹೇಳುತ್ತವೆ.

ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ .ತೀರ್ಥವನು ಪಿಡಿದವರು ತಿರುನಾಮಧಾರಿಗಳೇಜನ್ಮ ಸಾರ್ಥಕವಿರದವರು ಭಾಗವತರಹುದೇಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ .

ಅವರ ಕೀರ್ತನೆಗಳಲ್ಲಿ ಅವರ ಸಂದೇಶ ನೇರ ಮತ್ತು ಖಚಿತ. ಹಾಗೆಯೇ ಅಮೂರ್ತವಾದ ಪ್ರತಿಮಾ ನಿರೂಪಣೆಯಲ್ಲಿ ಪರಿಣತಿ, ಹಾಗೂ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತ ಸಾಹಿತ್ಯಗಳ ಪರಿಚಯವನ್ನು ಅವರ ಸಾಹಿತ್ಯದಲ್ಲಿ ಕಾಣಬಹುದು.

ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋ

ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊನೀ ದೇಹದೊಳಗೊ, ನಿನ್ನೊಳು ದೇಹವೂಬಯಲು ಆಲಯದೊಳಗೊ, ಆಲಯವು ಬಯಲೊಳಗೊಬಯಲು ಆಲಯವೆರಡು ನಯನದೊಳಗೊನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆಕುಸುಮದೊಳು ಗಂಧವೊ, ಗಂಧದೊಳು ಕುಸುಮವೊಕುಸುಮ ಗಂಧಗಳೆರಡು ಘ್ರಾಣದೊಳಗೊಅಸಮಭವ ಕಾಗಿನೆಲೆಯಾದಿಕೇಶವರಾಯಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆ

ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ

ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ

ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ


ಒಡಲು ಹಸಿಯಲು ಅನ್ನವಿಲ್ಲದಲೇ ಇರಬಹುದು

ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು

ಮಡದಿ ಮಕ್ಕಳನೆಲ್ಲಾ ತೊಲಗಿಸಿ ಬಿಡಬಹುದು

ಕಡಲೊಡೆಯ ನಿನ್ನ ಅರೆಘಳಿಗೆ ಬಿಡಲಾಗದು /೧/


ತಾಯಿ ತಂದೆಯ ಬಿಟ್ಟು ತಪವ ಮಾಡಲೂ ಬಹುದು

ದಾಯಾದಿ ಬಂಧುಗಳ ಬಿಡಲೂ ಬಹುದು

ರಾಯ ತಾ ಮುನಿದರೆ ರಾಜ್ಯವನೇ ಬಿಡಬಹುದು

ಕಾಯಜ ಪಿತ ನಿನ್ನ ಅರೆಘಳಿಗೆ ಬಿಡಲಾಗದು /೨/


ಪ್ರಾಣವ ಪರರು ಬೇಡಿದರೆತ್ತಿ ಕೊಡಬಹುದು

ಮಾನದಲಿ ಮನವ ತಗ್ಗಿಸಬಹುದು

ಜಾಣ ನಾಯಕನಾದ ಆದಿಕೇಶವರಾಯ

ಜಾಣ ಶ್ರೀಕೃಷ್ಣಾ ನಿನ್ನ ಅರೆಘಳಿಗೆ ಬಿಡಲಾಗದು /೩/

No comments:

Post a Comment